10 ಲಕ್ಷ ಮೌಲ್ಯದ ಜಿಂಕೆ ಕೊಂಬು ಮಾರಾಟ ಯತ್ನ, ಮೂವರು ಆರೋಪಿಗಳ ಬಂಧನ
ತಮಿಳುನಾಡಿನಿಂದ ಬೆಂಗಳೂರಿಗೆ ಜಿಂಕೆ ಕೊಂಬು ತಂದು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಮತ್ತು ಚಿಕ್ಕಬಾಣಾವರ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಕೊಂಬುಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಹಾಗೂ ಚಿಕ್ಕಬಾಣಾವರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುರುಳಿ (29), ಮಂಜುನಾಥ್ (39) ಮತ್ತು ಕಾರ್ಯಪ್ಪ (53) ಎಂದು ಗುರುತಿಸಲಾಗಿದೆ.
ಆರೋಪಿಗಳ ಬಳಿಯಿಂದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಎರಡು ಜಿಂಕೆ ಕೊಂಬುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಭಾಗದಿಂದ ಈ ಕೊಂಬುಗಳನ್ನು ಬೆಂಗಳೂರಿಗೆ ತರಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಬಾಣಾವರದ ಕಾಲೇಜು ಸಮೀಪ ಆರೋಪಿಗಳು ಜಿಂಕೆ ಕೊಂಬು ಮಾರಾಟಕ್ಕೆ ಮುಂದಾಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಪಿ. ಸುರೇಶ್ ನೇತೃತ್ವದ ತಂಡ ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಆರೋಪಿಗಳು ಕಾಡು ಪ್ರಾಣಿಗಳ ಅವಶೇಷಗಳನ್ನು ಅಕ್ರಮವಾಗಿ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಜಿಂಕೆಗಳನ್ನು ಬೇಟೆಯಾಡಿ ಕೊಂಬುಗಳನ್ನು ಸಂಗ್ರಹಿಸಿದ್ದಾರೆಯೋ ಅಥವಾ ಸತ್ತ ಪ್ರಾಣಿಗಳ ಕೊಂಬುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಯೋ ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕೆಲವು ಪ್ರಾಣಿಗಳ ಕೊಂಬು ಹಾಗೂ ಚರ್ಮಗಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆ, ಈ ಜಾಲದ ಹಿಂದೆ ಇನ್ನಷ್ಟು ಮಂದಿ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಸಂಪರ್ಕ ಜಾಲದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.



