ಮಾತ್ರೆ ಸೇವಿಸಿ ಬಿಜೆಪಿ ಮುಖಂಡ ಆತ್ಮಹತ್ಯೆ
ಬಿಜೆಪಿ ಮುಖಂಡನೊಬ್ಬ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ನಡೆದಿದೆ
(Kannada News) : ಕೆ.ಆರ್.ಪೇಟೆ: ಬಿಜೆಪಿ ಮುಖಂಡನೊಬ್ಬ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ, ಬಿಜೆಪಿ ಮುಖಂಡ, ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾಗಿದ್ದ ತೇಜಸ್ಗೌಡ(39) ಮಾತ್ರೆಗಳನ್ನು ನುಂಗಿ ಆತ್ಯಹತ್ಯೆಗೆ ಶರಣಾದವರು.
ಇವರು ಮಾಡುತ್ತಿದ್ದ ವ್ಯವಹಾರದಲ್ಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿತ್ತು. ನಷ್ಟದಿಂದ ಹೊರಬರಲು ಸಾಧ್ಯವಾಗದೆ ತೊಳಲಾಡುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ರಾತ್ರಿ ಒಂಬತ್ತು ಗಂಟೆಯ ವೇಳೆಯಲ್ಲಿ ಪತ್ನಿಗೆ ದೂರವಾಣಿ ಕರೆ ಮಾಡಿ ತಾನು ಮಾತ್ರೆ ಸೇವಿಸುತ್ತಿರುವುದಾಗಿ ತಿಳಿಸಿದ್ದು ಕೂಡಲೇ ಸಂಬಂಧಿಕರ ಸಹಾಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಬೇರೆಯವರು ಹಣಕ್ಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಬಗ್ಗೆ ಡೆತ್ ನೋಟ್ ಬರೆದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ತೇಜಸ್, ಪತ್ನಿ ಲಾವಣ್ಯ ಮತ್ತು ಮಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ವಳಗೆರೆ ಮೆಣಸದಲ್ಲಿ ನಡೆಯಿತು.
Web Title : BJP leader Commits Suicide By Consuming sleeping pills in KR pete